ಸುದ್ದಿ ಕನ್ನಡ ವಾರ್ತೆ

ಶಿರಸಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಭಾನುವಾರ ಸಂಸತ್ತಿನಲ್ಲಿ ಮಂಡಿಸಿರುವ 2026-27 ನಾಲಿನ ಬಜೆಟ್ ಸಮಷ್ಟಿ ಭಾವದಿಂದ ಕೂಡಿದ್ದು, ಸರ್ವರ ಅಭ್ಯುದಯದ ಜೊತೆಗೆ ಭವ್ಯ ಭಾರತದ ನಿರ್ಮಾಣಕ್ಕೆ ಒತ್ತು ನೀಡಿದೆ. ಎಲ್ಲರನ್ನೂ, ಎಲ್ಲವನ್ನೂ ಒಳಗೊಂಡ ವಿಕಸಿತ ಭಾರತದ ಬಜೆಟ್ ಇದಾಗಿದೆ ಎಂದು ಬಿಜೆಪಿ ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೃಷಿ ಆಧಾರಿತ ದೇಶವಾಗಿರುವ ಭಾರತದಲ್ಲಿನ ರೈತರ ಆದಾಯ ಹೆಚ್ಚಿಸಲು ಅಧಿಕ ಮೌಲ್ಯದ ಬೆಳೆಗಳಿಗೆ ಈ ಬಜೆಟ್ ನಲ್ಲಿ ವಿಶೇಷ ಆದ್ಯತೆ ನೀಡಲಾಗಿದ್ದು, ಉನ್ನತ ಮೌಲ್ಯದ ಬೆಳೆಗಳ ಕೃಷಿಗೆ ಒತ್ತು ನೀಡಲಾಗಿದೆ. ಮುಖ್ಯವಾಗಿ ತೋಟಗಾರಿಕಾ ಬೆಳೆಗಳಾದ ತೆಂಗು, ಶ್ರೀಗಂಧ, ಗೋಡಂಬಿ ಮತ್ತು ಕೋಕೋ ಬೆಳೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮೀಸಲಿಟ್ಟಿರುವುದು ನಮ್ಮ ಭಾಗದ ರೈತರ ಪಾಲಿಗೆ ಆಶಾದಾಯಕವಾಗಿದೆ. ಕೃಷಿ ಕ್ಷೇತ್ರದಲ್ಲಿ ಉತ್ಪಾದಕತೆ ಹೆಚ್ಚಳ ಮತ್ತು ಉದ್ಯಮಶೀಲತೆಯ ಮೂಲಕ ರೈತ ಆದಾಯ ಹೆಚ್ಚಿಸುವ ಗುರಿ ಹೊಂದಿರುವ ಸಂತಸದ ವಿಷಯವಾಗಿದೆ. ಜೊತೆಗೆ ಕೃಷಿಗೆ ಪೂರಕವಾಗಿ ಹೈನುಗಾರಿಕೆ, ಪಶು ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಆದ್ಯತೆ ಮತ್ತು ಕೃಷಿ ಕ್ಷೇತ್ರದ ಸಮಗ್ರ ಬೆಳವಣಿಗೆಗೆ ಪೂರಕವಾಗಿ ‘ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ಯ ಯೋಜನೆ’ಯನ್ನು ಜಾರಿಗೆ ತರುವುದಕ್ಕೆ ಹೊರಟಿದ್ದ ಭಾರತದ ಗ್ರಾಮಾಂತರ ಭಾಗದ ಆರ್ಥಿಕ ಚಿತ್ರಣವನ್ನೇ ಬದಲಿಸಲಿದೆ ಎಂಬ ವಿಶ್ವಾಸ ಎದ್ದು ಕಾಣುತ್ತದೆ.

ಜಿಲ್ಲೆಯ ಪ್ರವಾಸೋದ್ಯಮವನ್ನು ಬಲಪಡಿಸುವ ನಿಟ್ಟಿನಲ್ಲಿ ಟರ್ಟಲ್ ಟ್ರಯಲ್ ಯೋಜನೆಗೆ ಹೊನ್ನಾವರ, ಕಾರವಾರ, ಉಡುಪಿ ಸೇರಿದಂತೆ ಕರಾವಳಿ ಭಾಗದಲ್ಲಿ ಜೀವ ವೈವಿಧ್ಯದ ರಕ್ಷಣೆ ಜೊತೆಗೆ ಪ್ರವಾಸೋದ್ಯಮಕ್ಕೆ ಹೊಸ ದಿಕ್ಕು ನೀಡುವ ಕೇಂದ್ರ ಸರ್ಕಾರದ ನಡೆ‌ ಶ್ಲಾಘನೀಯ. ಒಟ್ಟಾರೆಯಾಗಿ ದೇಶದ ಸರ್ವತೋಮುಖ ಒಳಿತಗಾಗಿ ಮಂಡಿಸಿದ ಈ ಬಜೆಟ್, ಜನಸಾಮಾನ್ಯರ ಎಲ್ಲ ಆಶಯವನ್ನು ಮುಂದಿನ‌ ದಿನದಲ್ಲಿ ಗಟ್ಟಿಯಾಗಿ ಈಡೇರಿಸುತ್ತದೆ ಎಂಬ ವಿಶ್ವಾಸ ನಮ್ಮದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.