ಸುದ್ದಿ ಕನ್ನಡ ವಾರ್ತೆ
ಕಾರವಾರ: ನಗರದಲ್ಲಿ ಅಕ್ರಮವಾಗಿ
ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಗಳನ್ನು ನಿಯಮ ಮೀರಿ ಸಂಗ್ರಹಿಸಿಟ್ಟಿದ್ದ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯ ವೇಳೆ ನಿಯಮ ಮೀರಿ ದಾಸ್ತಾನು ಮಾಡಿದ್ದ ಮೂರು ಸಿಲಿಂಡರ್‌ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ನಗರದ ಹೋಟೆಲ್‌ ಅಯೋಧ್ಯ ಹಾಗೂ ಬಸವೇಶ್ವರ ಖಾನಾವಳಿಯಲ್ಲಿ ಈ ಅಕ್ರಮ ದಾಸ್ತಾನು ಪತ್ತೆಯಾಗಿದೆ. ಆಹಾರ ಇಲಾಖೆಯ ಅಧಿಕಾರಿ ರಾಜೇಶ ವಾರಿಕ್ ಹಾಗೂ ಶಿರಸ್ತೇದಾ‌ರ್ ದೀಪಕ ನಾಯಕ ನೇತೃತ್ವದ ಅಧಿಕಾರಿಗಳ ತಂಡವು ಈ ಹೋಟೆಲ್‌ಗಳ ಮೇಲೆ ಏಕಾಏಕಿ ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ, ಅಕ್ರಮವಾಗಿ ಸಿಲಿಂಡ‌ರ್ ಸಂಗ್ರಹಿಸಿಟ್ಟಿರುವುದು ಬೆಳಕಿಗೆ ಬಂದಿದೆ.
ಇತ್ತೀಚೆಗೆ ಮಾರುಕಟ್ಟೆಯಲ್ಲಿ ಕಮರ್ಷಿಯಲ್ ಸಿಲಿಂಡರ್‌ಗಳ ಕೊರತೆ ಎದುರಾಗಿದ್ದು, ಸುಲಭವಾಗಿ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಈ ಹೋಟೆಲ್‌ನವರು ನಿಯಮಬಾಹಿರವಾಗಿ ಮುಂಚೆ
ತಾವಾಗಿಯೇ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟುಕೊಂಡಿದ್ದರು ಎಂದು ತಿಳಿದುಬಂದಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು, ದಾಳಿ ನಡೆಸಿ ಸಿಲಿಂಡರ್‌ಗಳನ್ನು ವಶಕ್ಕೆ ಪಡೆಯುವ ಮೂಲಕ ಅಕ್ರಮಕೋ‌ರರಿಗೆ ಬಿಸಿ ಮುಟ್ಟಿಸಿದ್ದಾರೆ.

ಹೋಟೆಲ್‌ಗಳಲ್ಲಿ ಅಕ್ರಮವಾಗಿ ಗೃಹಬಳಕೆಯ ಸಿಲಿಂಡರ್‌ಗಳನ್ನು (LPG) ಬಳಸಲಾಗುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ವಾಣಿಜ್ಯ ಉದ್ದೇಶಕ್ಕೆ ಸಬ್ಸಿಡಿ ಸಿಲಿಂಡ‌ರ್ ಬಳಸುವುದು ಕಾನೂನುಬಾಹಿರವಾಗಿದ್ದು, ಅಕ್ರಮವಾಗಿ ಸಂಗ್ರಹಿಸಿದ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲು ಮತ್ತು ಮಾಲೀಕರಿಗೆ ಎಚ್ಚರಿಕೆ ನೀಡಲು ದಾಳಿಗಳನ್ನು ನಡೆಸಲಾಗುತ್ತಿದೆ.