ಸುದ್ದಿ ಕನ್ನಡ ವಾರ್ತೆ
​ಜೋಯಿಡಾ:ತಾಲೂಕಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರವಾಡ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಉದ್ದೇಶಿಸಿ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧಗಳಿಂದ ರಕ್ಷಿಸಿಕೊಳ್ಳುವ ವಿಧಾನಗಳು, ಡಿಜಿಟಲ್ ಅರೆಸ್ಟ್ ವಂಚನೆ, ತುರ್ತು ಸಹಾಯವಾಣಿಗಳಾದ 1930 (ಸೈಬರ್ ವಂಚನೆ), ERSS-112 ಹಾಗೂ ಮಕ್ಕಳ ಸಹಾಯವಾಣಿ 1098 ಕುರಿತು ಮಾಹಿತಿ ನೀಡಿದರು.

​ಇದರ ಜೊತೆಗೆ ರಸ್ತೆ ಸಂಚಾರ ನಿಯಮಗಳ ಪಾಲನೆ, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದು, ಕಾರಿನಲ್ಲಿ ಸೀಟ್‌ಬೆಲ್ಟ್ ಬಳಕೆಯ ಮಹತ್ವ, ಮಾದಕ ದ್ರವ್ಯಗಳ ದುಷ್ಪರಿಣಾಮಗಳು, ಬಾಲ್ಯ ವಿವಾಹ ತಡೆ ಹಾಗೂ ಪೋಕ್ಸೊ (POCSO) ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.

​ವಿದ್ಯಾರ್ಥಿಗಳು ಡಿಜಿಟಲ್ ಯುಗದಲ್ಲಿ ಎಚ್ಚರಿಕೆಯಿಂದ ವರ್ತಿಸುವಂತೆ ಹಾಗೂ ಯಾವುದೇ ಅನುಮಾನಾಸ್ಪದ ಘಟನೆಗಳು ಕಂಡುಬಂದಲ್ಲಿ ತಕ್ಷಣವೇ ಸಂಬಂಧಿತ ಸಹಾಯವಾಣಿಗಳಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.