ಸುದ್ದಿ ಕನ್ನಡ ವಾರ್ತೆ
ಶಿರಸಿ: ತಾಲೂಕಿನ ಗಣೇಶನಗರದಲ್ಲಿ, ಪರೀಕ್ಷೆಯ ಸಮಯದಲ್ಲಿ ಮೊಬೈಲ್ ನೋಡಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಧಾರುಣ ಘಟನೆ ನಡೆದಿದೆ.

ಮೃತ ದುರ್ದೈವಿಯನ್ನು ನಗರದ ಪ್ರತಿಷ್ಠಿತ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿ, 15 ವರ್ಷದ ಶುಭಂ ನಾಗೇಶ ನಾಯ್ಕ ಎಂದು ಗುರುತಿಸಲಾಗಿದೆ.

ಮುಂಬರುವ ವಾರ್ಷಿಕ ಪರೀಕ್ಷೆಗಳ ಹಿನ್ನೆಲೆಯಲ್ಲಿ ಟಿವಿ ನೋಡುವುದನ್ನು ಕಡಿಮೆ ಮಾಡಿ, ಮೊಬೈಲ್ ಗೀಳು ಬಿಟ್ಟು ಓದಿನತ್ತ ಸಂಪೂರ್ಣ ಗಮನಹರಿಸು ಎಂದು ಪೋಷಕರು ಮಗನ ಭವಿಷ್ಯದ ದೃಷ್ಟಿಯಿಂದ ಹಿತವಚನ ಹೇಳಿದ್ದರು.
ಆದರೆ, ಪೋಷಕರ ಈ ಮಾತಿನಿಂದ ತೀವ್ರವಾಗಿ ಬೇಸರಗೊಂಡು, ಅದನ್ನು ಸೂಕ್ಷ್ಮವಾಗಿ ತೆಗೆದುಕೊಂಡ ಬಾಲಕ ಶುಭಂ, ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ನೋಡಿಕೊಂಡು ನೇಣು ಬಿಗಿದುಕೊಂಡು ಈ ಕಠಿಣ ನಿರ್ಧಾರಕ್ಕೆ ಮುಂದಾಗಿದ್ದಾನೆ.

ಈ ಬಗ್ಗೆ ವಿಷಯ ತಿಳಿಯುತ್ತಿದ್ದಂತೆ ಆಘಾತಗೊಂಡ ಕುಟುಂಬಸ್ಥರು, ತಕ್ಷಣವೇ ಬಾಲಕನನ್ನು ಶಿರಸಿಯ ಟಿಎಸ್‌ಎಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಸತತ ಪ್ರಯತ್ನ ನಡೆಸಿ ತುರ್ತು ಚಿಕಿತ್ಸೆ ನೀಡಿದರೂ, ಯಾವುದೇ ಸ್ಪಂದನೆ ಸಿಗದೇ ಶುಭಂ ಮೃತಪಟ್ಟಿದ್ದಾನೆ. ಈ ಸಂಬಂಧ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.