ಸುದ್ದಿ ಕನ್ನಡ ವಾರ್ತೆ

ಜೋಯಿಡಾ: ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ
ಸಭಾಂಗಣದಲ್ಲಿ ಆಯೋಜಿಸಲಾದ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಸಮಗ್ರ ಪರಿಶೀಲನೆ ನಡೆಸಲಾಯಿತು.
ಸಭೆಯಲ್ಲಿ ಜೋಯಿಡಾ ತಾಲೂಕು ವ್ಯಾಪ್ತಿಯ ಕುಡಿಯುವ ನೀರಿನ ಲಭ್ಯತೆ, ಗ್ರಾಮೀಣ ಹಾಗೂ ನಗರ ಪ್ರದೇಶಗಳ ಸ್ವಚ್ಛತಾ ವ್ಯವಸ್ಥೆ, ರಸ್ತೆ ದುರಸ್ತಿ ಹಾಗೂ ನೂತನ ಕಾಮಗಾರಿಗಳು, ಆರೋಗ್ಯ ಕೇಂದ್ರಗಳು ಸೇರಿದಂತೆ ಸಾರ್ವಜನಿಕ ಮೂಲಸೌಕರ್ಯಗಳ ಅಭಿವೃದ್ಧಿ ಕುರಿತಂತೆ ಇಲಾಖಾವಾರು ಪ್ರಗತಿ ವರದಿಗಳನ್ನು ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಳ್ಳಲಾಯಿತು.
ಈ ಸಂದರ್ಭದಲ್ಲಿ, ಕಳೆದ ಮೂರು ಕೆಡಿಪಿ ಸಭೆಗಳಿಗೆ ಕೆ.ಆ‌ರ್.ಐ. ಡಿ.ಎಲ್ (ಲ್ಯಾಂಡ್ ಆರ್ಮಿ) ಇಲಾಖೆಯ ಅಧಿಕಾರಿಗಳು ಹಾಜರಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿದ ಶಾಸಕರಾದ ಆರ್ ವಿ ದೇಶಪಾಂಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಜೋಯಿಡಾ ತಾಲೂಕಿನಲ್ಲಿನ ಈ ಇಲಾಖೆಯ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಹಾಗೂ ಗುಣಮಟ್ಟದ ಕೊರತೆ ಇದೆ ಎಂಬ ಸಾರ್ವಜನಿಕರ ಅಸಮಾಧಾನವನ್ನೂ ಅವರು ಉಲ್ಲೇಖಿಸಿದರು.
ಸಭೆಯ ಮಧ್ಯದಲ್ಲೇ ಶಿರಸಿ ಮುಖ್ಯ ಕಚೇರಿಯ ಲ್ಯಾಂಡ್ ಆರ್ಮಿ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿದ ಅವರು, “ಮೂರು ಸಭೆಗಳಿಂದ ಏಕೆ ಗೈರು ಹಾಜರಾಗುತ್ತಿದ್ದೀರಿ? ಜನರ ಸಮಸ್ಯೆಗೆ ಸ್ಪಂದಿಸದಿರುವುದು ಏಕೆ? ಇದಕ್ಕೆ ಸ್ಪಷ್ಟಿಕರಣ ನೀಡಿ, ಇಲ್ಲವಾದರೆ ನೋಟಿಸ್ ಜಾರಿ ಮಾಡಲಾಗುತ್ತದೆ,” ಎಂದು ಎಚ್ಚರಿಕೆ ನೀಡಿದರು.
ಅಲ್ಲದೆ, ಮುಂದಿನ ಸಭೆಗಳಿಗೆ ಕಡ್ಡಾಯವಾಗಿ ಹಾಜರಾಗಿ, ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ತಲುಪಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.