ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ನಗರಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಬೆಳೆದು ನಿಂತಿದ್ದ ಕೃಷಿ ಬೆಳೆಗಳಿಗೆ ಭಾರೀ ಹಾನಿಯಾಗಿದೆ. ಮಾಂತೇಶ ಅವರ ತೋಟಕ್ಕೆ ರಾತ್ರಿ ವೇಳೆ ಗ್ರಾಮಕ್ಕೆ ನುಗ್ಗಿದ ಆನೆಗಳ ಹಿಂಡು ಜಮೀನುಗಳಿಗೆ ನುಗ್ಗಿ ಅಡಿಕೆ, ಬಾಳೆ ಹಾಗೂ ಇತರೆ ಬೆಳೆಗಳನ್ನು ತುಳಿದು ನಾಶಪಡಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

​ಆನೆಗಳ ನಿರಂತರ ಹಾವಳಿಯಿಂದ ರೈತರು ಆತಂಕಕ್ಕೀಡಾಗಿದ್ದು, ಕೃಷಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ. ಅರಣ್ಯ ಇಲಾಖೆ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಹಾನಿಯ ಪರಿಶೀಲನೆ ನಡೆಸಿ, ಸೂಕ್ತ ಪರಿಹಾರ ನೀಡಬೇಕು ಹಾಗೂ ಆನೆಗಳ ಹಾವಳಿಯನ್ನು ತಡೆಯಲು ಶಾಶ್ವತ ಕ್ರಮ ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.

​ಜೋಯಿಡಾ ಹಾಗೂ ಸೂಪಾ ಭಾಗದಲ್ಲಿ ಮಳೆಗಾಲ ಆರಂಭವಾದ ಬಳಿಕ ಕಾಡಾನೆಗಳ ಗ್ರಾಮ ಪ್ರವೇಶದ ಘಟನೆಗಳು ಹೆಚ್ಚಾಗುತ್ತಿದ್ದು, ಜನರು ರಾತ್ರಿ ಸಮಯದಲ್ಲಿ ಎಚ್ಚರಿಕೆಯಿಂದ ಇರಲು ಅಧಿಕಾರಿಗಳು ಸೂಚಿಸಿದ್ದಾರೆ.