ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಕರಂಜೋಯಿಡಾ ಗ್ರಾಮದ ವಾಗೇಲಿ ಗ್ರಾಮದಿಂದ ಜೋಯಿಡಾಕ್ಕೆ ಬರುತ್ತಿದ್ದ ಬಸ್ ಮಾರ್ಲಿ ಸಮೀಪ ತಲುಪಿದ ವೇಳೆ ರಸ್ತೆಯ ಮಧ್ಯಭಾಗಕ್ಕೆ ಮರದ ಬೃಹತ್ ಕೊಂಬೆಯೊಂದು ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಯಿತು.
ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳು ಧೈರ್ಯ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಪ್ರದರ್ಶಿಸಿ, ಎಲ್ಲರೂ ಸೇರಿ ರಸ್ತೆಗೆ ಅಡ್ಡವಾಗಿ ಬಿದ್ದಿದ್ದ ಮರದ ಕೊಂಬೆಯನ್ನು ತೆರವುಗೊಳಿಸಿದರು. ಇದರಿಂದ ಕೆಲಕಾಲ ಸ್ಥಗಿತಗೊಂಡಿದ್ದ ಸಂಚಾರ ಪುನಃ ಸುಗಮವಾಯಿತು.
ಮಳೆಗಾಲದಲ್ಲಿ ಈ ಭಾಗದಲ್ಲಿ ಮರದ ಕೊಂಬೆಗಳು ರಸ್ತೆಗೆ ಬೀಳುವ ಘಟನೆಗಳು ಆಗಾಗ ಸಂಭವಿಸುತ್ತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಸಂಚರಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ. ಅಲ್ಲದೆ ಅರಣ್ಯ ಇಲಾಖೆ ಹಾಗೂ ಸಂಬಂಧಿಸಿದ ಅಧಿಕಾರಿಗಳು ಅಪಾಯಕಾರಿಯಾಗಿ ವಾಲಿರುವ ಮರಗಳನ್ನು ಗುರುತಿಸಿ ಮುನ್ನೇಚ್ಚರಿಕಾ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹವೂ ವ್ಯಕ್ತವಾಗಿದೆ.
ಸ್ಥಳೀಯರ ಸಮಯೋಚಿತ ಕಾರ್ಯದಿಂದ ಯಾವುದೇ ಅಪಾಯ ಸಂಭವಿಸದೇ ಪ್ರಯಾಣಿಕರು ಸುರಕ್ಷಿತವಾಗಿ ತಮ್ಮ ಪ್ರಯಾಣವನ್ನು ಮುಂದುವರಿಸಿದರು.
