ಸುದ್ದಿ ಕನ್ನಡ ವಾರ್ತೆ
ಭಟ್ಕಳ:ತಾಲೂಕಿನ ಐತಿಹಾಸಿಕ ಮಾರಿಜಾತ್ರೆಯು ಜಾಲಿಕೋಡಿ ಸಮುದ್ರ ತೀರದಲ್ಲಿ ಮಾರಿ ಮೂರ್ತಿಯ ವಿಸರ್ಜನೆಯೊಂದಿಗೆ ಭಕ್ತಿಭಾವದಿಂದ ಸಂಪನ್ನಗೊಂಡಿತು.
ಜಾತ್ರೆಯ ಎರಡನೇ ದಿನ ತಾಯಿ ಮಾರಿಗೆ ವಿಶೇಷ ಪೂಜೆ ನೆರವೇರಿಸಿ, ಬಳಿಕ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮಾರಿಗುಡಿಯಿಂದ ಹೊರಟ ಮೆರವಣಿಗೆ ವಿವಿಧ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಾಲಿಕೋಡಿ ಸಮುದ್ರ ತೀರ ತಲುಪಿದ ಬಳಿಕ ಸಂಪ್ರದಾಯದಂತೆ ವಿಶೇಷ ಪೂಜೆ, ಮಂಗಳಾರತಿ ನೆರವೇರಿಸಿ ಮಾರಿ ಮೂರ್ತಿಯನ್ನು ಸಮುದ್ರದಲ್ಲಿ ವಿಸರ್ಜಿಸಲಾಯಿತು.
ಜಾತಿ-ಭೇದವಿಲ್ಲದೆ ಸಾವಿರಾರು ಭಕ್ತರು ಜಾತ್ರೆಯಲ್ಲಿ ಪಾಲ್ಗೊಂಡಿದ್ದು, ಕಾರ್ಯಕ್ರಮವು ಯಾವುದೇ ಅಹಿತಕರ ಘಟನೆಗಳಿಲ್ಲದೆ ಶಾಂತಿಯುತವಾಗಿ ನಡೆಯಿತು. ಭಕ್ತರ ಸಂಚಾರಕ್ಕೆ ಟೆಂಪೋ ಚಾಲಕರು ಮತ್ತು ಮಾಲಕರು ಸಹ ಸಾರಿಗೆ ವ್ಯವಸ್ಥೆ ಕಲ್ಪಿಸಿ ಸಹಕಾರ ನೀಡಿದರು.
