ಸುದ್ದಿ ಕನ್ನಡ ವಾರ್ತೆ
ದಾಂಡೇಲಿ: ನಗರದಿಂದ ಹಸನಾಳಕ್ಕೆ ಸಂಪರ್ಕ ಕಲ್ಪಿಸುವ ಟಿ.ಆರ್.ಟಿ. ರಸ್ತೆ ಬಳಿ ಕಪ್ಪು ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ಟಿ.ಆರ್.ಟಿ.ಯಿಂದ ಹಸನಾಳಕ್ಕೆ ತೆರಳುವ ರೈಲ್ವೆ ಹಳಿಯ ಸಮೀಪ ಚಿರತೆ ಕಾಣಿಸಿಕೊಂಡಿದೆ.
ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಕಪ್ಪು ಚಿರತೆಯ ಸಂಚಾರ ಕಂಡುಬರುತ್ತಿದೆ. ಎರಡು ದಿನಗಳ ಹಿಂದೆ ಹೋಂಸ್ಟೇಗೆ ನುಗ್ಗಿದ ಚಿರತೆ ಜರ್ಮನ್ ಶೆಫರ್ಡ್ ತಳಿಯ ನಾಯಿಯೊಂದನ್ನು ಕೊಂದು ಹಾಕಿತ್ತು. ಈ ಘಟನೆಗಳಿಂದ ಸ್ಥಳೀಯರ ಸಾಕುಪ್ರಾಣಿಗಳು ಹಾಗೂ ಜಾನುವಾರುಗಳಿಗೆ ತೊಂದರೆಯಾಗುತ್ತಿದ್ದು, ಕಪ್ಪು ಚಿರತೆಯ ಹಾವಳಿಯಿಂದ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಈಗಾಗಲೇ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಪ್ರಶಾಂತ ಕುಮಾರ ಕೆ.ಸಿ. ಹಾಗೂ ಸಹಾಯಕರ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್.ಕಳ್ಳಿಮಠ ಅವರ ಮಾರ್ಗದರ್ಶನದಲ್ಲಿ, ವಲಯ ಅರಣ್ಯಾಧಿಕಾರಿ ಗುರುಪ್ರಸಾದ ನೇತೃತ್ವದ ಅರಣ್ಯ ಸಿಬ್ಬಂದಿ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಸ್ಥಳೀಯ ನಿವಾಸಿಗಳು ಎಚ್ಚರಿಕೆ ವಹಿಸುವಂತೆ ಹಾಗೂ ರಾತ್ರಿ ವೇಳೆ ಹೊರಗೆ ಓಡಾಡದಂತೆ ಅರಣ್ಯ ಇಲಾಖೆ ಜಾಗೃತಿ ಮೂಡಿಸಿದೆ. ರಾತ್ರಿ ವೇಳೆ ಒಂಟಿಯೇ ಹೊರಗೆ ಹೋಗದಿರುವುದು, ಮಕ್ಕಳನ್ನು ಹಾಗೂ ಸಾಕುಪ್ರಾಣಿಗಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳುವಂತೆ ಅರಣ್ಯ ಇಲಾಖೆ ಮನವಿ ಮಾಡಿದೆ.
