ಸುದ್ದಿ ಕನ್ನಡ ವಾರ್ತೆ
ಅಂಕೋಲಾ : ಪಟ್ಟಣದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ ಪ್ಯಾಲೆಸ್ಟೈನ್ ಧ್ವಜ ಪ್ರದರ್ಶಿಸಿದ ಘಟನೆ ಕೆಲಕಾಲ ಪಟ್ಟಣದಲ್ಲಿ ಗೊಂದಲಕ್ಕೆ ಕಾರಣವಾಯಿತು. ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ, ಯಾವುದೇ ರೀತಿಯ ಅನಗತ್ಯ ಗೊಂದಲಕ್ಕೆ ಅವಕಾಶವಾಗದಂತೆ ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಈದ ಮೇರವಣಿಗೆಯು ಪಟ್ಟಣದ ಬೊಬ್ರುವಾಡದಿಂದ ಪಟ್ಟಣದಾದ್ಯಂತ ನಡೆಸಿ ಬಂಡಿಬಜಾರ ಬಳಿ ಘಟನೆ ಬೆಳಕಿಗೆ ಬಂದಿದೆ. ಮೆರವಣಿಗೆಯ ಸಂದರ್ಭದಲ್ಲಿ ಪ್ಯಾಲೆಸ್ಟೈನ್ ಧ್ವಜ ಹಾರಿಸಿರುವುದನ್ನು ಗಮನಿಸಿದ ಅಂಕೋಲಾ ಸಿಪಿಐ ಚಂದ್ರಶೇಖರ್ ಮಠಪತಿ ಅವರು ಧ್ವಜವನ್ನು ವಶಕ್ಕೆ ಪಡೆದು, ಮುಂದೆ ಇಂತಹ ಧ್ವಜಗಳನ್ನು ಪ್ರದರ್ಶಿಸದಂತೆ ಯುವಕನಿಗೆ ಎಚ್ಚರಿಕೆ ನೀಡಿದರು.
ಪೊಲೀಸರ ಸೂಚನೆಯನ್ನು ಪಾಲಿಸಿದ ಬಳಿಕ ಮೆರವಣಿಗೆ ಮುಂದುವರಿಯಲು ಅವಕಾಶ ನೀಡಲಾಯಿತು. ಪೊಲೀಸರು ಸಮಯೋಚಿತವಾಗಿ ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯದೆ ಮೆರವಣಿಗೆ ಶಾಂತಿಯುತವಾಗಿ ಮುಂದುವರಿಯಿತು.
ಅಂಕೋಲಾದಲ್ಲಿ ವಿವಿಧ ಸಮುದಾಯಗಳ ಜನರು ಸೌಹಾರ್ದಯುತವಾಗಿ ಬದುಕುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಮೆರವಣಿಗೆಗಳು ಹಾಗೂ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಭಾವನೆಗಳಿಗೆ ಧಕ್ಕೆ ತರುವ ಅಥವಾ ಅನಗತ್ಯ ವಿವಾದಕ್ಕೆ ಕಾರಣವಾಗಬಹುದಾದ ಯಾವುದೇ ರೀತಿಯ ಪ್ರದರ್ಶನಗಳಿಂದ ದೂರವಿದ್ದು, ಶಾಂತಿ ಮತ್ತು ಸೌಹಾರ್ದ ಕಾಪಾಡುವುದು ಅಗತ್ಯವಾಗಿದೆ.
ಪೊಲೀಸರ ಸಮಯೋಚಿತ ಕ್ರಮದಿಂದ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಈ ಘಟನೆಯು ಯಾವುದೇ ರೀತಿಯ ಕೋಮು ಸಂಘರ್ಷಕ್ಕೆ ಕಾರಣವಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
